ಮೈಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಬಳಿಕ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಹರೀಶ್ (42), ಪತ್ನಿ ನಿಶ್ಚಿತಾ (37), ಪುತ್ರಿಯರಾದ ರಕ್ಷಾ (13) ಮತ್ತು ವರ್ಷಾ (8) ಎಂದು ಗುರುತಿಸಲಾಗಿದೆ. ಹರೀಶ್ ಕಾರು ಶೋರೂಮ್ನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆಯಿಲ್ ಮಿಲ್ವೊಂದನ್ನು ಆರಂಭಿಸಿದ್ದರು ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ ಮನೆಗೆ ಬಂದ ಹರೀಶ್, ಪತ್ನಿ ಹಾಗೂ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ಮನೆಯ ಮೇಲ್ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ


