ಉಡುಪಿ, ಜು. 31: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದವರು.
ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಮುಂಜಾನೆ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಐವನ್ ರಿಚರ್ಡ್ ಅವರು ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ನಿಂದ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.


ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ರಿಚರ್ಡ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಮೃತರೊಂದಿಗೆ ಇದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವನ್ ರಿಚರ್ಡ್ ಅವರು ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಮೊದಲ ಪತ್ನಿಯಿಂದ ದೂರವಾಗಿ ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಆದರೆ, ಈ ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಸೊಕೋ (SOCO) ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.
ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ಹಿಂದಿನ ಉದ್ದೇಶ ಹಾಗೂ ಆರೋಪಿಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


