ಯಶ್ಪಾಲ್ ಸುವರ್ಣ ಹಾಗೂ ಆರ್ಎಸ್ಎಸ್ ಪ್ರತಿಕೃತಿಗೆ ಬೆಂಕಿ ಹಚ್ಚಿದ ಘಟನೆ ಖಂಡನೀಯ: ರಮಿತಾ ಸೂರ್ಯವಂಶಿ
ಉಡುಪಿ, ಜು. 31: ಕರಾವಳಿ ಜಿಲ್ಲೆಯಲ್ಲಿ ರಾಜಕೀಯ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಧರಣಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆರೋಪಿಸಿದ್ದಾರೆ.
ಪ್ರತಿಭಟನೆಯ ನೆಪದಲ್ಲಿ ವಿಪಕ್ಷಗಳು ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಸ್ಥಳೀಯ ಶಾಸಕ ಯಶ್ಪಾಲ್ ಸುವರ್ಣ ಅವರ ಛಾಯಾಚಿತ್ರ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸಾಂಪ್ರದಾಯಿಕ ಸಮವಸ್ತ್ರವನ್ನು ಹೋಲುವ ರೀತಿಯಲ್ಲಿ ಸಿದ್ಧಪಡಿಸಿದ್ದ ಪ್ರತಿಕೃತಿಗೆ ಬಿಜೆಪಿ ಚಿಹ್ನೆ ಅಳವಡಿಸಿ ಬೆಂಕಿ ಹಚ್ಚಿರುವ ಘಟನೆ ಖಂಡನೀಯ ಎಂದು ಹೇಳಿದ್ದಾರೆ.

ಈ ರೀತಿಯ ಕೃತ್ಯಗಳು ಕೇವಲ ರಾಜಕೀಯ ವಿರೋಧದ ಅಭಿವ್ಯಕ್ತಿಯಾಗಿರದೆ, ಸಾಂಸ್ಕೃತಿಕ ಮೌಲ್ಯಗಳಿಗೆ ಎಸಗಿದ ಅಪಚಾರವಾಗಿದೆ ಎಂದು ರಮಿತಾ ಸೂರ್ಯವಂಶಿ ಪ್ರತಿಪಾದಿಸಿದ್ದಾರೆ.
ಆರ್ಎಸ್ಎಸ್ ಭಾರತೀಯ ಸಂಸ್ಕೃತಿ ಹಾಗೂ ದೇಶಪ್ರೇಮದ ವಿಚಾರಗಳನ್ನು ಪ್ರಸಾರ ಮಾಡುತ್ತಿರುವ ಸಂಘಟನೆಯಾಗಿದೆ. ರಾಜಕೀಯ ಅಧಿಕಾರದ ಆಸೆಯಿಂದ ಇಂತಹ ಕೃತ್ಯಗಳಿಗೆ ಮುಂದಾಗಿರುವುದು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದ್ದಾರೆ.
ಘಟನೆಗೆ ಕಾರಣರಾದವರ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.


