ಬೆಳ್ತಂಗಡಿ, ಆ.5: 2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಿಎಫ್ಐ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಿಯಾಝ್ ಫರಂಗಿಪೇಟೆಗೆ ನ್ಯಾಯಾಲಯ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

2015ರ ಜುಲೈ 23ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಲಿಂಗಪ್ಪ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 153(ಎ) ಅಡಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಆಶೀತ್ ಅವರು ಸರ್ಕಾರದ ಪರ ವಾದ ಮಂಡಿಸಿದರು.

