ಬೈಂದೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ

ಉಡುಪಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಎಂಟು ಗ್ರಾಮಗಳನ್ನು ಕೈಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಒಂದು ವರ್ಷದ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿತು.
ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಸೇನೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿವರೆಗೆ ಸಾಗಿತು.


ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಗ್ರಾಮಗಳನ್ನು ಸೇರ್ಪಡೆಗೊಳಿಸಿರುವುದರಿಂದ ಗ್ರಾಮೀಣ ಜನರಿಗೆ ತೊಂದರೆಯಾಗಲಿದೆ. ಆದ್ದರಿಂದ ಪ್ರಮುಖ ನಾಡ ಪಂಚಾಯಿತಿ ಸೇರಿದಂತೆ ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಳೆದ ಒಂದು ವರ್ಷದಿಂದ ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಶುಕ್ರವಾರ ಹಸಿರು ಬಾವುಟ ಬೀಸಿ ಘೋಷಣೆಗಳನ್ನು ಕೂಗಿದರು. ಬಳಿಕ ರಸ್ತೆ ತಡೆ ನಡೆಸಿ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು.
ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರೂ ರೈತರು ಪ್ರತಿಭಟನೆ ಹಿಂಪಡೆಯಲು ಒಪ್ಪಲಿಲ್ಲ. ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


‘ನ್ಯಾಯ ಸಿಗುವವರೆಗೂ ಹೋರಾಟ’
‘ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದೇವೆ. ಇಂದಿನ ಪ್ರತಿಭಟನೆ ನಿರ್ಣಾಯಕ ಹಂತ ತಲುಪಿದೆ. ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವ ಕುರಿತು ಇಂದು ಅಂತಿಮ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವವರೆಗೂ ರಸ್ತೆ ತಡೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದರು. ‘ನ್ಯಾಯ ಬೇಕು’ ಎಂಬ ಘೋಷಣೆಗಳೊಂದಿಗೆ ಮಹಿಳೆಯರು ಮತ್ತು ಮಕ್ಕಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!