ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ಇಬ್ಬರು ಮಕ್ಕಳು ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಹಾಗೂ ರಕ್ಷಿತಾ ಎಂದು ಗುರುತಿಸಲಾಗಿದೆ. ಇಬ್ಬರೂ ಬಾವಿಗೆ ಬಿದ್ದ ಘಟನೆ ನಿನ್ನೆ ನಡೆದಿದ್ದು, ತಡರಾತ್ರಿ ಮಕ್ಕಳ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ.

ಮಕ್ಕಳನ್ನು ರಕ್ಷಿಸಲು ಅವರ ತಂದೆ ಸಾಬಣ್ಣ (40) ಕೂಡ ಬಾವಿಗೆ ಜಿಗಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಾಬಣ್ಣ ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಘಟನೆಯ ಕುರಿತು ನಿಡಗುಂದಿ ಪೊಲೀಸರು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

