ಧರ್ಮಸ್ಥಳದಲ್ಲಿ ವಾಹನ ಡಿಕ್ಕಿ ಹೊಡೆಸಿ ಕೊಲೆ ಯತ್ನ: ಆರೋಪಿ ನ್ಯಾಯಾಂಗ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರನ್ನು ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪ ಕೇಳಿಬಂದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕೃಷ್ಣ ಎಂಬವರು ನೀಡಿದ ದೂರಿನ ಪ್ರಕಾರ, ಧರ್ಮಸ್ಥಳ ನಿವಾಸಿ ಶರತ್ ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಜುಲೈ 30ರಂದು ಸಂಜೆ ಕೆಲಸ ಮುಗಿಸಿಕೊಂಡು ಬಾಲಕೃಷ್ಣ ಅವರು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಶರತ್ ಟಾಟಾ ಸುಮೊ ವಾಹನದಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಧರ್ಮಸ್ಥಳ ಗ್ರಾಮದ ಕುರುಮಾನಿ ಕ್ರಾಸ್ ಬಳಿ ಬಾಲಕೃಷ್ಣ ಅವರ ದ್ವಿಚಕ್ರ ವಾಹನಕ್ಕೆ ಟಾಟಾ ಸುಮೊ ವಾಹನದಿಂದ ಡಿಕ್ಕಿ ಹೊಡೆಸಲಾಗಿದ್ದು, ಪರಿಣಾಮ ಅವರು ಗಾಯಗೊಂಡಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಾಗಿ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಬಾಲಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 109ರ ಅಡಿಯಲ್ಲಿ ತನಿಖೆ ಮುಂದುವರಿಸಲಾಗಿದೆ.

ತನಿಖೆ ನಡೆಸಿದ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ಶರತ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!