ಮಲಯಾಳಂ ಕಡ್ಡಾಯ ಭಾಷಾ ಮಸೂದೆ-2025 ನ್ನು ಸರಕಾರ ಹಿಂದಕ್ಕೆ ಪಡೆಯುವ ಭರವಸೆ ನನಗಿದೆ:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ

ಮಂಗಳೂರು:ಕೇರಳ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿರುವ ಮಲಯಾಳಂ ಕಡ್ಡಾಯ ಭಾಷಾ ಮಸೂದೆ-2025*”ಯನ್ನು ಮರುಪರಿಶೀಲನೆ ನಡೆಸುವುದಾಗಿ ಕೇರಳ ರಾಜ್ಯಪಾಲರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಭರವಸೆ ನೀಡಿದ್ದಾರೆ ಅದಕ್ಕೆ ಅಂಕಿತವನ್ನು ಹಾಕುವುದಿಲ್ಲ ಎನ್ನುವ ಭರವಸೆಯನ್ನು ನೀಡಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ತಿಳಿಸಿದರು.

ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದ ಹೊರಗಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತ ರಕ್ಷಣೆಗೆ ಕಾರ್ಯನಿರ್ವಹಿಸುತ್ತಿದೆ ಈ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿರುವ ಕನ್ನಡ ಭಾಷಿಕರ ಹಿತಾಸಕ್ತಿಗೆ ಧಕ್ಕೆಯಾಗುವಂತೆ ಮಲಯಾಳಂ ಕಡ್ಡಾಯ ಭಾಷಾ ಮಸೂದೆ ಜಾರಿಗೊಳ್ಳುತ್ತಿರುವುದನ್ನು ವಿರೋಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗಿದೆ ಎಂದರು.

2017ರಲ್ಲಿ ಇದೇ ರೀತಿಯ ಭಾಷಾ ಮಸೂದೆಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಈಗ ಕೇರಳ ಸರ್ಕಾರ ಮರುಪ್ರಸ್ತಾಪಿಸಿರುವ ಮಸೂದೆ ಸಂಪೂರ್ಣ ಅಸಂವಿಧಾನಿಕವಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಶೇಕಡಾ 90ರಷ್ಟು ಕನ್ನಡ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

ಭಾರತ ಸಂವಿಧಾನದ 350(ಬಿ), 347, 30, 350ಎ ಹಾಗೂ 350 ವಿಧಿಗಳು ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಸ್ಪಷ್ಟವಾಗಿ ರಕ್ಷಿಸುತ್ತವೆ ಆದರೂ ಈ ಮಸೂದೆ ಜಾರಿಯಾದರೆ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕಾದ ಪರಿಸ್ಥಿತಿ ಉಂಟಾಗಿ ಅವರ ಶೈಕ್ಷಣಿಕ ಮತ್ತು ಭವಿಷ್ಯ ಜೀವನಕ್ಕೆ ಭಾರಿ ಹಾನಿಯಾಗಲಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಕಾಸರಗೋಡು ಹಾಗೂ ಕೇರಳದ ಇತರ ಕನ್ನಡ ಭಾಷಿಕ ಪ್ರದೇಶಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕ ಕಡ್ಡಾಯಗೊಳಿಸುವುದು, ಪೊಲೀಸ್ ಠಾಣೆ, ರೈಲು ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕನ್ನಡ ಸೂಚನಾ ಫಲಕ ಸ್ಥಾಪನೆ, ಸರ್ಕಾರಿ ಕಚೇರಿ ವ್ಯವಹಾರ ಸ್ಥಳೀಯ ಕನ್ನಡ ಭಾಷೆಯಲ್ಲಿ ನಡೆಸುವುದು, ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯ ಭಾಷಾ ಅಲ್ಪಸಂಖ್ಯಾತರಿಗೆ ಆದ್ಯತೆ, ಭಾಷಾ ಅಲ್ಪಸಂಖ್ಯಾತರ ಸಮಸ್ಯೆಗಳ ಕುರಿತು ಎರಡು ತಿಂಗಳಿಗೊಮ್ಮೆ ಸಭೆ ನಡೆಸುವಂತೆ ಜಿಲ್ಲಾಧಿಕಾರಿ ಸಮಿತಿಗೆ ಸೂಚನೆ, ಈ ಎಲ್ಲಾ ಬೇಡಿಕೆಗಳನ್ನು ಜಾರಿಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯದ ಭಾಷಾ ಅಲ್ಪಸಂಖ್ಯಾತ ವಿಭಾಗ ಈಗಾಗಲೇ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ ಎಂದು ತಿಳಿಸಿದರು.

ಕರ್ನಾಟಕ ಮುಖ್ಯಮಂತ್ರಿಗಳು ಈಗಾಗಲೇ ಕೇರಳ ಮುಖ್ಯಮಂತ್ರಿ ಅವರಿಗೆ ಈ ಮಸೂದೆಯನ್ನು ವಾಪಸ್ ಪಡೆಯುವಂತೆ ಜನವರಿ 8ರಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನೇತೃತ್ವದಲ್ಲಿ ಕಾಸರಗೋಡು ಕನ್ನಡಿಗರ ನಿಯೋಗವು ಜನವರಿ 10ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೇರಳ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಸಲ್ಲಿಸಲಿದೆ ಎಂದು ಹೇಳಿದರು.

ಕೇರಳ ಸರಕಾರ ದುರುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರುತ್ತಿದೆ. ಜನರನ್ನು ಹಿತವನ್ನು ಕಾಪಾಡಬೇಕಾದ ಸರಕಾರ ಜನರ ಹಿತವನ್ನು ಕಾಪಾಡದೆ ಆಡಳಿತ ನಡೆಸುವ ಕ್ರಮ ಸರಿಯಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸದಸ್ಯರಾದ ಎ ಆರ್ ಸುಬ್ಬಯಕಟ್ಟೆ,
ಸುಕೇಶ , ಟಿ ಶಂಕರ ನಾರಾಯಣ ಭಟ್ ,ನ್ಯಾಯವಾದಿ ಮುರಳಿಧರ ಬಲ್ಲೂಕುರಾಯ ,ಎಸ್ ಜೆ ಸೋಮಶೇಖರ,
ಝಡ್ ಎ ಕಯ್ಯಾರ್ ಉಪಸ್ತಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!