ಕ್ಯಾನ್ಸರ್ ಬಗ್ಗೆ ಭಯ ಬೇಡ, ಅರಿವು ಇರಲಿ – ಡಾ. ಹೆಚ್. ಆರ್ ತಿಮ್ಮಯ್ಯ

ಮಂಗಳೂರು-ಕ್ಯಾನ್ಸರ್ ಎಂಬ ಮಾರಕ ಖಾಯಿಲೆಗೆ ಭಯ ಪಡದೆ ಆರಂಭದಲ್ಲಿಯೇ ಶೀಘ್ರ ಚಿಕಿತ್ಸೆ ಪಡೆದುಕೊಳ್ಳುವುದು ಅತ್ಯಗತ್ಯ. ಕ್ಯಾನ್ಸರ್ ಶೀಘ್ರ ಪತ್ತೆ ಮತ್ತು ತಪಾಸಣೆಯಿಂದ ತಡೆಗಟ್ಟಬಹುದು. ಈ ರೋಗದ ವಿರುದ್ಧ ಹೋರಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಆರ್ ತಿಮ್ಮಯ್ಯ ಹೇಳಿದರು.ಅವರು ಶನಿವಾರ ನಗರದ ಜಿಲ್ಲಾ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಸರಕಾರಿ ಆಸ್ಪತ್ರೆ, ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗ ಹಾಗೂ ಎನ್.ಡಿ.ಸಿ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಯಾನ್ಸರ್ ದಿನ ಉದ್ಘಾಟಿಸಿ ಮಾತನಾಡಿದರು.


ಮನೆಯ ಜವಾಬ್ದಾರಿಯಿಂದ ಅಥವಾ ಕೆಲಸದ ಒತ್ತಡದಿಂದಾಗಿ ಮಹಿಳೆಯರು ಆರೋಗ್ಯದ ಕಡೆಗೆ ಹೆಚ್ಚಾಗಿ ಗಮನಹರಿಸುತ್ತಿಲ್ಲ. ಮಹಿಳೆಯರಲ್ಲೂ ಕ್ಯಾನ್ಸರ್ ರೋಗಗಳು ಕಂಡುಬರುತ್ತಿದ್ದು, ಈ ಬಗ್ಗೆ ಅವರಿಗೆ ಸೂಕ್ತ ಮಾಹಿತಿಯ ಕೊರತೆ ಇರುತ್ತದೆ. ಪ್ರತಿಯೊಬ್ಬರೂ ಕೂಡ ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸದೆ, ಉತ್ತಮ ಆರೋಗ್ಯ ಪಡೆಯಲು ನಿಯಮಿತವಾಗಿ ತಪಾಸಣೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಸಾಕಷ್ಟು ಅತ್ಯುನ್ನತ ಮಟ್ಟದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಿದ್ದು, ರೋಗದ ಲಕ್ಷಣಗಳು ಕಂಡು ಬಂದರೆ ತಡಮಾಡದೆ ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವೆನ್‍ಲಾಕ್ ಅಧೀಕ್ಷಕ ಡಾ.ಸುಧಾಕರ್ ಮಾತನಾಡಿ,ಉತ್ತಮ ಅಭ್ಯಾಸ, ಜೀವನ ಶೈಲಿ, ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳುವುದರಿಂದ ಕ್ಯಾನ್ಸರ್ ನಂತಹ ಮಾರಕ ಖಾಯಿಲೆಯಿಂದ ದೂರವಿರಬಹುದು. ನಾವು ತಿನ್ನುವ ಆಹಾರದ ಮೇಲೆ ನಿಗಾವಹಿಸಿದರೆ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಕ್ಯಾನ್ಸರ್ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ಪಸರಿಸಬೇಕು ಎಂದು ಅವರು ಹೇಳಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೆ.ಎಂ.ಸಿ ಆಸ್ಪತ್ರೆ ವಿಕಿರಣ ಅಂಕೋಲಜಿ ವಿಭಾಗದ ಮುಖ್ಯಸ್ಥ ಡಾ.ಅತಿಯಮಾನ್ ಮಾತನಾಡಿ, ಕ್ಯಾನ್ಸರ್ ಸಾವಿನ ಪ್ರಮುಖ ಕಾರಣಗಳಲ್ಲಿ ಒಂದಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಬಹಳ ಅಗತ್ಯ. ಧೂಮಪಾನ, ಮದ್ಯಪಾನದಂತಹ ಕೆಟ್ಟ ಚಟಗಳು ನಮ್ಮ ಆರೋಗ್ಯವನ್ನು ಹಾಳು ಮಾಡುತ್ತವೆ.

ಪುರುಷರಲ್ಲಿ ಶ್ವಾಸಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಜಠರ ಮತ್ತು ಅನ್ನನಾಳದ ಕ್ಯಾನ್ಸರ್ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ. ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕಂಠ ಮತ್ತು ಗರ್ಭಕೋಶದ ಕ್ಯಾನ್ಸರ್‍ಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ. ಕ್ಯಾನ್ಸರ್‍ಗೆ ಕಾರಣ ಆಹಾರ ಪದ್ಧತಿ ಮತ್ತು ಜೀವನ ಶೈಲಿ. ಹೆಚ್ಚಿನ ದೇಹ ವಿನ್ಯಾಸ, ಕಡಿಮೆ ಪ್ರಮಾಣದಲ್ಲಿ ಹಣ್ಣು ಮತ್ತು ತರಕಾರಿಗಳ ಸೇವನೆ, ಕಡಿಮೆ ದೈಹಿಕ ಚಟುವಟಿಕೆ, ತಂಬಾಕು ಸೇವನೆಯಿಂದಲೇ ಸಾವು ಸಂಭವಿಸುತ್ತವೆ. ಧೂಮಪಾನ, ಮದ್ಯಪಾನ ಸೇವನೆ ಮಾಡದೆ, ಆಹಾರ ಶೈಲಿಯಲ್ಲಿ ಬದಲಾವಣೆ ತಂದುಕೊಂಡಲ್ಲಿ ಕ್ಯಾನ್ಸರ್ ಖಾಯಿಲೆ ತಡೆಗಟ್ಟಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಡಿ.ಎಸ್.ಒ ಡಾ. ನವೀನ್ ಚಂದ್ರ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಸುದರ್ಶನ್, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ವೆನ್‍ಲಾಕ್ ಪ್ಯಾರಮೆಡಿಕಲ್ ವಿಭಾಗದ ಪ್ರಾಂಶುಪಾಲೆ ಗ್ರೇಸಿ, ವೆನ್‍ಲಾಕ್ ಉಪಶಮನ ಆರೈಕೆ ವಿಭಾಗದ ವೈದ್ಯಾಧಿಕಾರಿ ಡಾ. ಅಣ್ಣಯ್ಯ ಕುಲಾಲ್ ಮತ್ತಿತರರು ಇದ್ದರು.ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ ಕಾರ್ಯಕ್ರಮ ನಿರೂಪಿಸಿದರು.“ವಿಶ್ವ ಕ್ಯಾನ್ಸರ್ ದಿನ”ದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‍ನಿಂದ (ಜ್ಯೋತಿ) ಜಿಲ್ಲಾ ವೆನ್‍ಲಾಕ್ ಆಸ್ಪತ್ರೆವರೆಗೆ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಆರ್ ತಿಮ್ಮಯ್ಯ ಚಾಲನೆ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!