ಮಂಗಳೂರು :ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಸೆಕೆಯಿಂದ ಕೂಡಿದ ವಾತಾವರಣವಿತ್ತು. ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣವಿದ್ದರೂ, ಎಲ್ಲಿಯೂ ಮಳೆಯಾಗಿಲ್ಲ. ಮೈಸೂರು ಮತ್ತು ಚಾಮರಾಜನಗರದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿಗ್ರಿ ಸೆಂಟಿಗ್ರೇಡ್ ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ಇದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ.