ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದರೂ ಪ್ರಧಾನಿ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಯಾರೂ ನೈತಿಕ ಹೊಣೆ ಹೊತ್ತಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, ಅವರ ಕನಸು ನುಚ್ಚುನೂರಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಆಡಳಿತ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಮತ್ತು ಅನಿಶ್ಚಿತತೆಯೊಳಗೆ ಸಿಲುಕಿದ್ದಾರೆ. ಇಂತಹ ಗಂಭೀರ ಲೋಪದೋಷಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು.

ಕರ್ನಾಟಕದಲ್ಲಿ ಈ ಹಿಂದೆ ಸಿಇಟಿ ವ್ಯವಸ್ಥೆಯ ಮೂಲಕ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗುತ್ತಿತ್ತು. ಆದರೆ, 2016ರಲ್ಲಿ NEET ಜಾರಿಗೆ ಬಂದ ಬಳಿಕ ದೇಶದಾದ್ಯಂತ ಗೊಂದಲ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಹತ್ತು ವರ್ಷಗಳಲ್ಲಿ 5 ಬಾರಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಇಂತಹ ಪ್ರಶ್ನೆಪತ್ರಿಕೆ ಸೋರಿಕೆಗಳು ಬಹಳಷ್ಟು ನಡೆದಿವೆ. ಇನ್ನು ಮುಂದೆ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗಳನ್ನು ನಡೆಸದೇ, ರಾಜ್ಯಗಳಿಗೆ ಸ್ವತಂತ್ರವಾಗಿ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕು.

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದಿಂದ ಮನನೊಂದು 5ಕ್ಕೂ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿಗಳು ಬೆಳಕಿಗೆ ಬಂದಿವೆ. ವರ್ಷಪೂರ್ತಿ ಅಭ್ಯಾಸ ಮಾಡಿ ಪರೀಕ್ಷೆ ಬರೆದು ನಂತರ ಜಿಗುಪ್ಸೆಯಿಂದ ಈ ಸಾವುಗಳು ಸಂಭವಿಸಿವೆ. ಈ ಅಮಾಯಕ ಬಡ ವಿದ್ಯಾರ್ಥಿಗಳ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ. ತಕ್ಷದಿಂದಲೇ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಘೋಷಿಸಬೇಕು ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಕಠಿಣ ಶಿಕ್ಷೆ ವಿಧಿಸಬೇಕು.

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಾರಿ ಇಂಜಿನಿಯರಿಂಗ್ ಸೀಟುಗಳ ಭರ್ತಿಗೆ ವೈದ್ಯಕೀಯ ಕೌನ್ಸೆಲಿಂಗ್ ಗಿಂತ ಮೊದಲೇ ಕೌನ್ಸಲಿಂಗ್ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ರವರು ಪ್ರಕಟಿಸಿರುವುದು ಸ್ವಾಗತಾರ್ಹ.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಯಾವುದೇ ವ್ಯವಸ್ಥೆಯನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಆಡಳಿತ ಪಕ್ಷದವರೇ ಹಗರಣದಲ್ಲಿ ಸಿಲುಕಿರುವುದರಿಂದ, ಸಿಬಿಐ ತನಿಖೆಯು ದೇಶದ ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ಉಸ್ತುವಾರಿಯಲ್ಲೇ ನಡೆಯಬೇಕು. ಆಗ ಮಾತ್ರ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲು ಸಾಧ್ಯ. ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಕೇಂದ್ರ ಶಿಕ್ಷಣ ಸಚಿವಾಲಯ ಹೊರಡಿಸಿರುವ ಕೋಚಿಂಗ್ ಸೆಂಟರ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನೀಟ್ ಹಗರಣದಲ್ಲಿ ಭಾಗಿಯಾಗಿರುವ ಮತ್ತು ಯಾವುದೇ ಪರವಾನಗಿ ಇಲ್ಲದೆ ನಡೆಯುತ್ತಿರುವ ಎಲ್ಲಾ ಅಕ್ರಮ ಕೋಚಿಂಗ್ ಸೆಂಟರ್‌ಗಳನ್ನು ತಕ್ಷಣವೇ ಸೀಜ್ ಮಾಡಬೇಕು. ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಸುಹಾನ್ ಆಳ್ವ, ಉಪಾಧ್ಯಕ್ಷರಾದ ಕೀರ್ತನ್ ಗೌಡ, ಸುಕ್ವಿಂಧರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಸೋಹನ್, ಸಂತೋಷ್ ಸುಳ್ಯ, ಮಂಗಳೂರು ವಿಧಾನಸಭಾ ಅಧ್ಯಕ್ಷ ಸಾಹಿಲ್ ಮಂಚಿಲ, ಪ್ರಧಾನ ಕಾರ್ಯದರ್ಶಿ ಯು.ಟಿ.ಫರೀದ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!