ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ದೇಶದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಘಟನೆಗಳು ಕಾನೂನಿನಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಆರ್ಎಸ್ಎಸ್ ಕೂಡ ನೋಂದಣಿ ಮಾಡಿಕೊಂಡರೆ ಉತ್ತಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಸಂಘಟನೆಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಕಾಪಾಡಲು ನೋಂದಣಿ ಅಗತ್ಯವಾಗಿದೆ ಎಂದು ಹೇಳಿದರು.
ದೇಶದ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘಟನೆಗಳು ನಿಯಮಾನುಸಾರ ನೋಂದಣಿ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿವೆ. ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘವೂ ನೋಂದಣಿ ಪ್ರಕ್ರಿಯೆಗೆ ಒಳಪಟ್ಟರೆ ಇನ್ನಷ್ಟು ಪಾರದರ್ಶಕತೆ ಮೂಡಲಿದೆ ಎಂದು ಅವರು ಹೇಳಿದರು.