ಮಂಗಳೂರು, ಜೂ.23: 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ಮೂಲನಿವಾಸಿ ಕೊರಗ ಸಮುದಾಯದ ಎಸ್ಎಸ್ಎಲ್ಸಿ ಹಾಗೂ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನೆರವಾಗುವ ಉದ್ದೇಶದಿಂದ ವರ್ಷದಲ್ಲಿ ಎರಡು ಕಂತುಗಳಲ್ಲಿ (ಶೇ.50ರಂತೆ) ಪ್ರೋತ್ಸಾಹಧನ ನೀಡಲಾಗುತ್ತದೆ.
ಪ್ರೋತ್ಸಾಹಧನದ ಮೊತ್ತ ಹೀಗಿದೆ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ₹10,000, ಪಿಯುಸಿ ಹಾಗೂ ತತ್ಸಮಾನ ಕೋರ್ಸುಗಳಿಗೆ ವಾರ್ಷಿಕ ₹12,000, ಎಲ್ಲಾ ಪದವಿ ಕೋರ್ಸುಗಳಿಗೆ ವಾರ್ಷಿಕ ₹15,000 ಹಾಗೂ ಎಲ್ಲಾ ಸ್ನಾತಕೋತ್ತರ ಕೋರ್ಸುಗಳಿಗೆ ವಾರ್ಷಿಕ ₹18,000 ನೀಡಲಾಗುತ್ತದೆ.
ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ (ಗ್ರೇಡ್-1 ಮತ್ತು 2) ಕಚೇರಿಯಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬೇಕು ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.