ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯ ಘಟನೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಹೇಳಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಘಟನೆ ಸಮಾಜದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಸ್ವತಂತ್ರ ಬದುಕಿನ ಬಗ್ಗೆ ತೀವ್ರ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣುಮಗಳನ್ನು ತಮ್ಮ ಮನೆಯ ಮಗಳು ಹಾಗೂ ಸಹೋದರಿಯಂತೆ ಗೌರವದಿಂದ ಕಾಣುವ ಮನೋಭಾವ ಬೆಳೆಸಬೇಕಿದೆ. ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಾಗ ಮಾತ್ರ ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದನ್ನು ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಹತ್ಯೆಗೀಡಾದ ಯುವತಿಯ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ ಅವರು, ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣುಮಗಳು ಭಯವಿಲ್ಲದೆ ಹಾಗೂ ಸುರಕ್ಷಿತವಾಗಿ ಬದುಕುವ ವಾತಾವರಣ ನಿರ್ಮಾಣವಾಗಬೇಕು ಎಂದು ಆಶಿಸಿದರು.


