ಮಂಗಳೂರಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಸಮಸ್ಯೆಗಳು ಎದುರಾಗಿವೆ.


ಮಳೆಯ ತೀವ್ರತೆಯನ್ನು ಗಮನಿಸಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಇದರ ನಡುವೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದೆ. ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ಮನೆಯ ಛಾವಣಿ ಕುಸಿದಿದೆ.

ರಾಯಿ ಗ್ರಾಮದ ದಡ್ಡು ಪ್ರದೇಶದಲ್ಲಿ ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಬಿದ್ದು ಹಾನಿಯಾಗಿದ್ದು, ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ವಾಸ್ತವ್ಯದ ಮನೆಗೆ ಹಾನಿಯಾಗಿದೆ.ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

