ಮಂಗಳೂರು: ಸಹಕಾರ ಕ್ಷೇತ್ರದ ಪಿತಾಮಹರೆಂದೇ ಖ್ಯಾತರಾದ ಮೊಳಹಳ್ಳಿ ಶಿವರಾವ್ ಅವರ ಬದುಕು, ತ್ಯಾಗ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಬ್ಯಾಂಕ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ರಚಿಸಿರುವ ಈ ಕೃತಿಯು, ಸಹಕಾರದ ಮೂಲಕ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಬದುಕನ್ನೇ ಮುಡಿಪಾಗಿಟ್ಟ ಮೊಳಹಳ್ಳಿ ಶಿವರಾವ್ ಅವರ ಸಾಧನೆಗಳನ್ನು ದಾಖಲಿಸಿದೆ.

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಡಾ. ರಾಜೇಂದ್ರ ಕುಮಾರ್, “ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರಾಗಿರುವ ಹಾಗೂ ಸುಮಾರು 35 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಎತ್ತಿನಗಾಡಿಯಲ್ಲಿ ಸಂಚರಿಸಿ ಜಿಲ್ಲೆಯ ಸಹಕಾರ ಚಳವಳಿಯನ್ನು ಬಲಪಡಿಸಲು ಶ್ರಮಿಸಿದ ಮೊಳಹಳ್ಳಿ ಶಿವರಾವ್ ಅವರು ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿ, ಪುತ್ತೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಲೇ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜೀವನಗಾಥೆ ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು, ನಬಾರ್ಡ್ನ ಸಂಗೀತ, ರಮೇಶ್, ಸುಧೀರ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


