₹57 ಲಕ್ಷ ಖರ್ಚು… ಆದರೂ ಕುಡಿಯಲು ನೀರಿಲ್ಲ!

ಜಲ ಜೀವನ್ ಮಿಷನ್ ಕಾಮಗಾರಿ ಅಪೂರ್ಣ; ಚೇಲಾರು ಮಧ್ಯ ಗ್ರಾಮಸ್ಥರ ಆಕ್ರೋಶ

ಮಂಗಳೂರು: ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಚೇಲಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧ್ಯ ಗ್ರಾಮದಲ್ಲಿ ಇಂದಿಗೂ ಸಮರ್ಪಕ ಕುಡಿಯುವ ನೀರು ಸಿಗುತ್ತಿಲ್ಲ. ಕಾಮಗಾರಿ ಆರಂಭವಾಗಿ ಹಲವು ವರ್ಷ ಕಳೆದರೂ ಬಾವಿ, ಟ್ಯಾಂಕ್ ಹಾಗೂ ಪೈಪ್‌ಲೈನ್ ವ್ಯವಸ್ಥೆ ಪೂರ್ಣಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಮಧ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಸುಮಾರು ₹54–57 ಲಕ್ಷ ವೆಚ್ಚದಲ್ಲಿ ಬಾವಿ, ನೀರಿನ ಟ್ಯಾಂಕ್ ಹಾಗೂ ಪೈಪ್‌ಲೈನ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಹಲವು ವರ್ಷ ಕಳೆದರೂ ಯೋಜನೆ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಪಂಪ್ ಇದೆ… ನೀರು ಮಾತ್ರ ಬರುತ್ತಿಲ್ಲ!

ಯೋಜನೆಯಡಿ ನಿರ್ಮಿಸಿರುವ ಬಾವಿಯಲ್ಲಿ ಪಂಪ್ ಅಳವಡಿಸಲಾಗಿದ್ದರೂ ಅದು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಬಾವಿಯಿಂದ ಟ್ಯಾಂಕ್‌ಗೆ ನೀರು ಪೂರೈಕೆಯಾಗುತ್ತಿಲ್ಲ. ಟ್ಯಾಂಕ್‌ನಿಂದ ಮನೆಗಳಿಗೆ ನೀರು ತಲುಪಿಸುವ ಪೈಪ್‌ಲೈನ್ ಕಾಮಗಾರಿಯೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇನ್ನು ಟ್ಯಾಂಕ್ ನಿರ್ಮಾಣದ ಗುಣಮಟ್ಟದ ಬಗ್ಗೆಯೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಟ್ಯಾಂಕ್‌ನಲ್ಲಿ ನೀರು ಸಂಗ್ರಹವಾಗುತ್ತಿಲ್ಲ ಹಾಗೂ ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನಗಳಿವೆ. ಮಳೆಗಾಲದಲ್ಲಿ ಟ್ಯಾಂಕ್‌ಗೆ ಹಾನಿಯಾಗುವ ಭೀತಿಯೂ ಇದೆ ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರ ಬದಲಾದರೂ ಕಾಮಗಾರಿ ಪೂರ್ಣವಾಗಿಲ್ಲ

ಕಾಮಗಾರಿ ಗುತ್ತಿಗೆ ಪಡೆದವರು ಅದನ್ನು ಮತ್ತೊಬ್ಬರಿಗೆ ವಹಿಸಿರುವುದು ಹಾಗೂ ಹೀಗೆ ಕೈಯಿಂದ ಕೈಗೆ ಕಾಮಗಾರಿ ಸಾಗಿರುವುದರಿಂದ ಯೋಜನೆ ವಿಳಂಬವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಇಂಜಿನಿಯರ್‌ಗಳು ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿ ಬಗ್ಗೆ ಸೂಕ್ತ ನಿಗಾ ವಹಿಸಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.

ಈ ಕುರಿತು ಪಂಚಾಯಿತಿ, ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಬೋರ್‌ವೆಲ್ ಇದ್ದರೂ ಪಂಪ್ ಅಳವಡಿಸಿಲ್ಲ!

ಗ್ರಾಮದಲ್ಲಿ ಹಲವು ಬೋರ್‌ವೆಲ್‌ಗಳು ಹಾಗೂ ಕುಡಿಯುವ ನೀರಿನ ಬಾವಿಗಳಿದ್ದರೂ ಅವುಗಳ ಸಮರ್ಪಕ ನಿರ್ವಹಣೆ ನಡೆಯುತ್ತಿಲ್ಲ. ಕೆಲವು ಬೋರ್‌ವೆಲ್‌ಗಳಿಗೆ ಪಂಪ್ ಅಳವಡಿಸದಿರುವುದರಿಂದ ನೀರಿನ ಲಭ್ಯತೆ ಇದ್ದರೂ ಗ್ರಾಮಸ್ಥರಿಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.

ಸದ್ಯ ಗ್ರಾಮಸ್ಥರು ತಾತ್ಕಾಲಿಕವಾಗಿ ಡ್ರಮ್‌ಗಳಲ್ಲಿ ಸಂಗ್ರಹಿಸಿರುವ ನೀರನ್ನು ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆ ನೀರಿನಲ್ಲಿಯೂ ಕೆಸರು ಸೇರಿಕೊಂಡಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ನೀರು ಕೊಡಿ, ಬೇರೆ ಸಮಸ್ಯೆ ಏನೂ ಇಲ್ಲ’

ಚೇಲಾರು ಮಧ್ಯ ಗ್ರಾಮದಲ್ಲಿ ಸುಮಾರು ಹತ್ತು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಜಲ ಜೀವನ್ ಮಿಷನ್ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆಯಿತ್ತು. ಆದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಬಳಿಕವೂ ನೀರು ಸಿಗದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

“ನಮಗೆ ಬೇರೆ ಯಾವುದೇ ದೊಡ್ಡ ಬೇಡಿಕೆ ಇಲ್ಲ. ಸಮರ್ಪಕ ಕುಡಿಯುವ ನೀರು ಸಿಕ್ಕರೆ ಸಾಕು. ಸರ್ಕಾರದ ಹಣದಲ್ಲಿ ನಿರ್ಮಿಸಿರುವ ಯೋಜನೆಯನ್ನು ಪೂರ್ಣಗೊಳಿಸಿ, ಮನೆಗಳಿಗೆ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹಾಗೂ ಗ್ರಾಮಸ್ಥರಾದ ಚರಣ್ ರಾಜ್ ಭಂಡಾರಿ ಸೇರಿದಂತೆ ಸ್ಥಳೀಯರು ಸಂಬಂಧಪಟ್ಟ ಡಿಸಿ, ತಹಶೀಲ್ದಾರ್, ಕಂದಾಯ ಅಧಿಕಾರಿಗಳು, ಪಿಡಿಒ ಹಾಗೂ ಜಲ ಜೀವನ್ ಮಿಷನ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!