ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರನ ಅಡ್ಡಗಟ್ಟಿ ದರೋಡೆ

ಬಂಟ್ವಾಳ: ತಾಲೂಕಿನ ಗ್ರಾಮೀಣ ಭಾಗದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ನಾಲ್ವರು ದರೋಡೆ ನಡೆಸಿದ ಘಟನೆ ಗುರುವಾರ ನಡೆದಿದೆ.
ಸುರತ್ಕಲ್ ನಿವಾಸಿ ಮಯ್ಯದಿ ಎಂಬವರು ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್‌ನಲ್ಲಿ ಹಾಕಿದ್ದ ಸಿಮೆಂಟ್‌ನ ಹಣವನ್ನು ವಸೂಲಿ ಮಾಡಿಕೊಂಡು ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಸವಾರನನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ದರೋಡೆಗೊಳಗಾದ ಬ್ಯಾಗ್‌ನಲ್ಲಿ ಸುಮಾರು ₹8 ಲಕ್ಷಕ್ಕೂ ಅಧಿಕ ಹಣ ಇತ್ತು ಎನ್ನಲಾಗುತ್ತಿದ್ದು, ಆರೋಪಿಗಳು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.


ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯ ನಿಖರ ವಿವರಗಳು ಹಾಗೂ ದರೋಡೆಗೊಳಗಾದ ಹಣದ ಮೊತ್ತ ಪೊಲೀಸ್ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!