ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16 ವರ್ಷದ ಬಾಲಕಿಯನ್ನು ಕೆಲ ದಿನಗಳಿಂದ ಅಪರಿಚಿತ ವ್ಯಕ್ತಿಯೊಬ್ಬ ಬಸ್ಸಿನಲ್ಲಿ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಆಗಸ್ಟ್ 19ರಂದು ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗಲೂ ಆ ವ್ಯಕ್ತಿ ಆಕೆಯನ್ನು ಗಮನಿಸುತ್ತಿದ್ದನೆಂದು ದೂರಲಾಗಿದೆ.

ಭಯಗೊಂಡ ಬಾಲಕಿ ತನ್ನ ತಾಯಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಘಟನೆ ತಿಳಿಸಿದ್ದಾಳೆ. ಬಳಿಕ ತಾಯಿ ಹಾಗೂ ಕಚೇರಿ ಮಾಲೀಕರು ಬಾಲಕಿ ತಿಳಿಸಿದ ವ್ಯಕ್ತಿಯನ್ನು ಬಸ್ ನಿಲ್ದಾಣದ ಬಳಿ ವಿಚಾರಿಸಿದಾಗ, ತನ್ನ ಹೆಸರು ಜಯಂತ್ ಎಂದು ತಿಳಿಸಿ ಅಲ್ಲಿಂದ ತೆರಳಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಬಂಟ್ವಾಳ ಸರಪಾಡಿ ನಿವಾಸಿ ಜಯಂತ್ (47) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಕರಣವನ್ನು ಬಿಎನ್ಎಸ್ 2023ರ ಕಲಂ 78 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿಯಲ್ಲಿ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



