ಮಂಗಳೂರು: ಎಸ್ಐಆರ್ನ ಎರಡನೇ ಹಂತದ ಪರಿಶೀಲನೆ ಹಾಗೂ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಮತಗಳ ಅಳಿಸುವಿಕೆಗಿಂತ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದಕ್ಕೆ ಚುನಾವಣಾ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.
ಈ ಕುರಿತು ಚುನಾವಣಾ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, 18 ವರ್ಷ ಪೂರ್ಣಗೊಂಡಿರುವ ಹಾಗೂ ಮತದಾನಕ್ಕೆ ಅರ್ಹತೆ ಹೊಂದಿರುವ ಪ್ರತಿಯೊಬ್ಬರನ್ನೂ ಮತದಾರರ ಪಟ್ಟಿಗೆ ಸೇರಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿರುವುದಾಗಿ ಅವರು ತಿಳಿಸಿದರು.

ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ ಸೇರಿದಂತೆ ಸ್ಪೆಲ್ಲಿಂಗ್ ಅಥವಾ ಇತರ ತಪ್ಪುಗಳಿದ್ದರೆ, ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಅವುಗಳನ್ನು ಸರಿಪಡಿಸಲು ಅವಕಾಶ ನೀಡಬೇಕು. ವಿದೇಶದಲ್ಲಿರುವ ಕಾರಣಕ್ಕೆ ನೇರವಾಗಿ ಹಾಜರಾಗಲು ಸಾಧ್ಯವಾಗದ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಚುನಾವಣಾ ಆಯೋಗ ಸೂಕ್ತ ವ್ಯವಸ್ಥೆ ರೂಪಿಸಬೇಕು ಎಂದು ಅವರು ಹೇಳಿದರು.

ಈ ಸಂಬಂಧ ಇಡೀ ರಾಜ್ಯಕ್ಕೆ ಒಂದೇ ರೀತಿಯ ಸ್ಪಷ್ಟ ಮಾರ್ಗಸೂಚಿ ಇರಬೇಕು. ಜಿಲ್ಲೆ ಹಾಗೂ ಸ್ಥಳೀಯ ಮಟ್ಟದಲ್ಲಿ ವಿಭಿನ್ನ ರೀತಿಯ ನಿಯಮಗಳನ್ನು ಅನುಸರಿಸುವುದರಿಂದ ಗೊಂದಲ ಉಂಟಾಗುವ ಸಾಧ್ಯತೆಯಿದ್ದು, ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಯು.ಟಿ. ಖಾದರ್ ತಿಳಿಸಿದರು.
ತಮ್ಮ ಕ್ಷೇತ್ರದಲ್ಲಿ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮತದಾರರ ಪರಿಶೀಲನೆ ಹಾಗೂ ನೋಂದಣಿ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಎರಡನೇ ಹಂತದ ಪ್ರಕ್ರಿಯೆಯನ್ನೂ ಯಾವುದೇ ಗೊಂದಲವಿಲ್ಲದೆ ಪರಿಣಾಮಕಾರಿಯಾಗಿ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದಾಗಿ ಸಚಿವರು ಹೇಳಿದರು.

