ಮಂಗಳೂರು:ಸೆಪ್ಟೆಂಬರ್ 18ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಂಗಳೂರಿನ ಹೊರಗೆ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಕರಾವಳಿಯಲ್ಲಿ ನಡೆಯುತ್ತಿರುವುದು ಮಂಗಳೂರು ಹಾಗೂ ಕರಾವಳಿ ಜನತೆಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಹಿತಾಸಕ್ತಿದಾರರೊಂದಿಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಸಂಪುಟ ಸಭೆಯ ಅಜೆಂಡಾ ಹಾಗೂ ಪ್ರಮುಖ ನಿರ್ಧಾರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕರಾವಳಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಯುವ ಇಂಜಿನಿಯರ್ಗಳು, ಅಧಿಕಾರಿಗಳು ಸೇರಿದಂತೆ ಸಾಮಾನ್ಯ ಜನರಿಂದಲೂ ಉತ್ತಮ ಸಲಹೆಗಳು ಬಂದಿವೆ. ಸೂಕ್ತ ಸಲಹೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಗಣಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದರು.’

