ವಿದ್ಯಾರ್ಥಿ ಸಂಘಗಳ ಚುನಾವಣೆ ತಕ್ಷಣ ನಡೆಸಲಿ: ಐವನ್ ಡಿ’ಸೋಜಾ

ಮಂಗಳೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಈ ಕುರಿತು ಮಾರ್ಗಸೂಚಿ ಹೊರಡಿಸಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 150 ಅಂಗಸಂಸ್ಥೆ ಕಾಲೇಜುಗಳು ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಮಾರ್ಗಸೂಚಿಯಂತೆ ತಕ್ಷಣ ಚುನಾವಣೆ ಘೋಷಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿ ಸಂಘಗಳ ಚುನಾವಣೆ ಕೇವಲ ಮನರಂಜನೆಗಾಗಿ ಅಲ್ಲ. ವಿದ್ಯಾರ್ಥಿ ನಾಯಕತ್ವ ಬೆಳೆಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಯುವಕರಿಗೆ ಅವಕಾಶ ಕಲ್ಪಿಸುವುದು ಇದರ ಉದ್ದೇಶ. ತಾವು ಕೂಡ ವಿದ್ಯಾರ್ಥಿ ನಾಯಕರಾಗಿ ಬೆಳೆದು ಬಳಿಕ ವಿಧಾನಸಭೆ ಹಾಗೂ ವಿಧಾನ ಪರಿಷತ್‌ಗೆ ಬಂದಿರುವುದಾಗಿ ಅವರು ಹೇಳಿದರು.

ಚುನಾವಣೆಗಳು ಸಾಧ್ಯವಾದಷ್ಟು ನೇರವಾಗಿ ನಡೆಯಬೇಕು. ಮತದಾನಕ್ಕೆ ಅರ್ಹರಾಗಿರುವ ಎಲ್ಲ ವಿದ್ಯಾರ್ಥಿಗಳಿಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಇರಬೇಕು. ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಬೇಕು ಎಂದು ಅವರು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದಂತೆ ಪೋಸ್ಟರ್, ಬ್ಯಾನರ್, ಪ್ಲ್ಯಾಕಾರ್ಡ್‌ಗಳಿಗೆ ನಿರ್ಬಂಧ ಸೇರಿದಂತೆ ಸರ್ಕಾರ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದರಿಂದ ಕಾಲೇಜುಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಮಾರ್ಗಸೂಚಿಯಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ನಾಮಪತ್ರ ಸಲ್ಲಿಕೆ ದಿನಾಂಕ ಹಾಗೂ ಚುನಾವಣಾ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಬೇಕು. ವಿದ್ಯಾರ್ಥಿಗಳಿಗೆ ನಾಯಕತ್ವದ ಹೊಣೆಗಾರಿಕೆ ನೀಡುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಐವನ್ ಡಿ’ಸೋಜಾ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ, ಎನ್‌ಎಸ್‌ಯುಐನ ಸುಹಾನ್ ಆಳ್ವ ಹಾಗೂ ಶೌನ್, ಮಾಜಿ ಕಾರ್ಪೊರೇಟರ್‌ಗಳಾದ ಅಪ್ಪಿ ಎಸ್., ಭಾಸ್ಕರ್ ರಾವ್ ಮತ್ತು ಸತೀಶ್ ಪೆಂಗಲ್, ಕಾಂಗ್ರೆಸ್ ಮುಖಂಡರಾದ ಮನುರಾಜ್ ಎಂ.ಪಿ., ಶರತ್ ಕುಮಾರ್ ಹೊಯ್ಗೆ ಬಜಾರ್ ಹಾಗೂ ಇಮ್ರಾನ್ ಎ.ಆರ್. ಉಪಸ್ಥಿತರಿದ್ದರು.

SHARE
Loading spinner

2 thoughts on “ವಿದ್ಯಾರ್ಥಿ ಸಂಘಗಳ ಚುನಾವಣೆ ತಕ್ಷಣ ನಡೆಸಲಿ: ಐವನ್ ಡಿ’ಸೋಜಾ

Leave a Reply

Your email address will not be published. Required fields are marked *

error: Content is protected !!