ಶಿಕ್ಷಣ, ಸಂಸ್ಕೃತಿ, ಸಮಾಜ ಸೇವೆಗೆ ಮೋಹನ್ ಆಳ್ವರ ಕೊಡುಗೆ ಅಪಾರ:ಡಾ. ವೀರೇಂದ್ರ ಹೆಗ್ಡೆ

ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಆಯೋಜಿಸುತ್ತಿರುವ ಪ್ರೇರಣಾ ದಿವಸ್ – 2026 ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಡೆಯವರು ಬಿಡುಗಡೆಗೊಳಿಸಿದರು.


ನಂತರ ಅವರು ಮಾತನಾಡಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘವು ಪ್ರತಿವರ್ಷವೂ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಅಧ್ಯಾಪಕರನ್ನು ಗುರುತಿಸಿ, ಗೌರವಿಸುವ ಮೂಲಕ ಅವರ ಸೇವೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಅಧ್ಯಾಪಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ಈ ಬಾರಿಯ ಶಿಕ್ಷಣ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ‘ಅಧ್ಯಾಪಕ ಭೂಷಣ’ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ವಿಚಾರ. ಶಿಕ್ಷಣ, ಸಂಸ್ಕೃತಿ ಹಾಗೂ ಸಮಾಜ ಸೇವಾ ಕ್ಷೇತ್ರಗಳಿಗೆ ಅವರು ಸಲ್ಲಿಸಿರುವ ಅಪಾರ ಕೊಡುಗೆಯನ್ನು ಗುರುತಿಸಿ ನೀಡಲಾಗುತ್ತಿರುವ ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ. ಈ ಸಂದರ್ಭದಲ್ಲಿ ಡಾ. ಎಂ. ಮೋಹನ್ ಆಳ್ವ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಇದೇ ಬರುವ ದಿನಾಂಕ ಸೆಪ್ಟೆಂಬರ್ 26ರಂದು ಶನಿವಾರ ಅಪರಾಹ್ನ 2.30ಕ್ಕೆ ಉಡುಪಿಯ ಮಾಧವ ಕೃಪಾ ಸಭಾಂಗಣ, ಹೋಟೆಲ್ ಕಿದಿಯೂರು ಇಲ್ಲಿ ನಡೆಯಲಿರುವುದು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಇದರ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ, ಪ್ರೊ.ಮಾಧವ ಎಂ ಕೆ, ಸಂಘಟನಾ ಕಾರ್ಯದರ್ಶಿ ಜಯಲಕ್ಷ್ಮಿ ಆರ್ ಶೆಟ್ಟಿ, ಉಡುಪಿ ವಿಭಾಗದ ಸಂಘಟನಾ ಕಾರ್ಯದರ್ಶಿ ಯಶವಂತ ಕುದ್ರೋಳಿ, ಕೋಶಾಧಿಕಾರಿ ಗೀತಾ ಜೈನ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!