ಮಂಗಳೂರು: ‘ನಾನು ಎನ್ಎಸ್ಯುಐ ನಾಯಕನಾಗಿದ್ದು, ಬೆಳೆದವನು. ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ನನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧವಾಗಿದ್ದು ನಡೆದುಕೊಂಡು ಬಂದಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ .
ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಬರೆದವರು ಯಾವ ನೈತಿಕತೆ ಆಧಾರದಲ್ಲಿ ಕಾಂಗ್ರೆಸ್ನ ಎಂಎಲ್ಸಿ ಟಿಕೆಟ್ ಕೇಳಿರುವುದು ಎಂಬುದನ್ನು ಆರೋಪ ಮಾಡಿದವರು ಸ್ಪಷ್ಟಪಡಿಸಲಿ’ ಎಂದು ತಮ್ಮ ಮೇಲಿನ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಇನ್ನು ಮುಂದೆ ಈ ರೀತಿಯಾಗಿ ಇಂತಹ ಆರೋಪ ಮಾಡಿದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದರು.
ಯಾವುದೇ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಎದುರಾದಾಗ ‘ಗುಡ್ ಪರ್ಸನ್ ಇನ್ ರಾಂಗ್ ಪಾರ್ಟಿ ಎಂಬ ಹೇಳಿಕೆ ನೀಡುತ್ತಾರೆ. ಅದನ್ನೇ ಕೆಲವರು ಗಾಳವಾಗಿಸಿಕೊಂಡು ನಮ್ಮಲ್ಲಿ ಕೆಲವರು ಗಾಳಿಯಲ್ಲಿ ಗುಂಡು ಹೊಡೆದಂತೆ ಮಾತನಾಡುತ್ತಾರೆ. ಯಾರ ಜತೆ ಚಕ್ಕಂದ, ಒಳಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದನ್ನು ಆರೋಪ ಮಾಡುವವರು ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮಂಜುನಾಥ ಭಂಡಾರಿ ಉತ್ತರಿಸಿದರು.