ಕೇರಳ : ಶಬರಿಮಲೆ ದೇವಸ್ಥಾನದಲ್ಲಿ ಅಸ್ತಿತ್ವದಲ್ಲಿರುವ ಹಳೆಯ ಸಂಪ್ರದಾಯಗಳನ್ನು ಕಾಪಾಡಿಕೊಳ್ಳಲು ತಿರುವಾಂಕೂರು ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಲಿದೆ ಎಂದು ಮಂಡಳಿಯ ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.ದೇವಸ್ಥಾನದ ನಿರ್ವಹಣೆಯನ್ನು ನೋಡಿಕೊಳ್ಳುವ ಟ್ರಾವಂಕೂರ್ ದೇವಸ್ವಂ ಬೋರ್ಡ್ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನೀಡದ ಹಳೆ ಸಂಪ್ರದಾಯವನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದೆ.
2018ರಲ್ಲಿ ಮಹಿಳೆಯರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿದ್ದ ಸುಪ್ರಿಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಪುನರ್ಪರಿಶೀಲನಾ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಕಳೆದ ತಿಂಗಳು ನ್ಯಾಯಾಲಯವು ಮಾರ್ಚ್ 14ರೊಳಗೆ ತಮ್ಮ ನಿಲುವು ತಿಳಿಸುವಂತೆ ಮಂಡಳಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮಂಡಳಿ ತನ್ನ ಸ್ಪಷ್ಟ ನಿಲುವು ಪ್ರಕಟಿಸಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಳಿಯ ಅಧ್ಯಕ್ಷ ಕೆ. ಜಯಕುಮಾರ್, ಗರ್ಭಧಾರಣೆಯ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶ ನೀಡುವ 2018ರ ತೀರ್ಪಿಗೆ ವಿರೋಧವಾಗಿ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು. ಶಬರಿಮಲೆ ದೇವಾಲಯದ ಆಚರಣೆ, ಸಂಪ್ರದಾಯ ಮತ್ತು ನಂಬಿಕೆಗಳನ್ನು ಕಾಪಾಡುವುದು ಮಂಡಳಿಯ ಮುಖ್ಯ ಆದ್ಯತೆ ಎಂದರು.
10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವ ಪದ್ಧತಿಯನ್ನು ಮುಂದುವರಿಸಲಾಗುವುದು. ಈ ನಿಲುವನ್ನು ಸುಪ್ರೀಂಕೋರ್ಟ್ಗೆ ಅಧಿಕೃತವಾಗಿ ತಿಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಸಂಪ್ರದಾಯಗಳ ರಕ್ಷಣೆಗೆ ರಾಜ್ಯ ಸರ್ಕಾರವೂ ಬೆಂಬಲ ನೀಡಬೇಕು ಎಂದು ಮಂಡಳಿ ಆಗ್ರಹಿಸಿದೆ.