ಬೆಳ್ಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಅತೀ ಹೆಚ್ಚು ಬಾರಿ ಆಲಿಸಿದ ಹಿನ್ನೆಲೆಯಲ್ಲಿ ಬೆಳ್ಳೂರು ಪ್ರದೇಶದ ಇಬ್ಬರು ಬಿಜೆಪಿ ಬೂತ್ ಅಧ್ಯಕ್ಷರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅಭಿನಂದಿಸಿದ್ದಾರೆ. ಬೆಳ್ಳೂರು ಪಂಚಾಯತ್ನ ಹಳೆಯ ಬೂತ್ 90 (ಹೊಸ ಬೂತ್ 104) ಅಧ್ಯಕ್ಷರಾಗಿರುವ ಪುಳಿತ್ತಡಿ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಹಳೆಯ ಬೂತ್ 91 (ಹೊಸ ಬೂತ್ 108 – ಜಿ.ಹೆಚ್.ಎಸ್ ಬೆಳ್ಳೂರು) ಅಧ್ಯಕ್ಷರಾದ ರಮೇಶ್ ಆಚಾರ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಬೀನ್ ನೇರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವು ದೇಶದ ಹಳ್ಳಿ ಹಳ್ಳಿಗಳಲ್ಲಿರುವ ಸಾಮಾನ್ಯ ನಾಗರಿಕರಿಗೂ ಮೆಚ್ಚುಗೆ ಪಡೆದಿದ್ದು, ವಿವಿಧ ಸಾಮಾಜಿಕ ಹಾಗೂ ರಾಷ್ಟ್ರೀಯ ವಿಷಯಗಳ ಕುರಿತು ಜನರಿಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಪ್ರತಿ ತಿಂಗಳು ಪ್ರಸಾರವಾಗುವ ಈ ಕಾರ್ಯಕ್ರಮವು ಸಾಮಾನ್ಯ ಜನತೆಗೆ ಆತ್ಮವಿಶ್ವಾಸ ತುಂಬಿ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೃಷಿ, ಕಾರ್ಮಿಕ ವಲಯ, ಸಂಸ್ಕೃತಿ ಹಾಗೂ ಗ್ರಾಮೀಣ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಮಾರ್ಗದರ್ಶನ ನೀಡುವ ಮೂಲಕ ಜನರಿಗೆ ಉಪಯುಕ್ತ ಸಲಹೆಗಳನ್ನು ನೀಡುತ್ತಿದೆ ಎಂದು ಅವರು ಹೇಳಿದರು.
ಆದ್ದರಿಂದ ಪ್ರತಿಯೊಂದು ಬೂತ್ ಮಟ್ಟದಲ್ಲೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿ ಅದರಲ್ಲಿನ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.