ಕೇರಳದ ಮುಂದಿನ ಮುಖ್ಯಮಂತ್ರಿ ಯಾರು? ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ

ತಿರುವನಂತಪುರಂ: ಹತ್ತು ವರ್ಷಗಳ ಎಡ ಪ್ರಜಾಸತ್ತಾತ್ಮಕ ಮೈತ್ರಿ (ಎಲ್‌ಡಿಎಫ್) ಆಡಳಿತಕ್ಕೆ ತೆರೆ ಎಳೆದು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕೇರಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದ್ದರೂ, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಹಿರಿಯ ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಆಲಪ್ಪುಳ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೆಸರು ಮುಂಚೂಣಿಯಲ್ಲಿದೆ. ನಾಯರ್ ಸಮುದಾಯಕ್ಕೆ ಸೇರಿದ ವೇಣುಗೋಪಾಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

63 ವರ್ಷದ ವೇಣುಗೋಪಾಲ್ ಅವರು ಕಾಂಗ್ರೆಸ್ ಸಂಘಟನಾ ರಚನೆ ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ಅವರನ್ನು ಮುಖ್ಯಮಂತ್ರಿ ಮಾಡಲು ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರ ಅಭಿಪ್ರಾಯದ ಮೇಲೆ ಅವಲಂಬಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಪ್ರಮುಖ ಹೆಸರು ರಮೇಶ್ ಚೆನ್ನಿತ್ತಲಾ ಅವರದ್ದಾಗಿದೆ. ನಾಯರ್ ಸಮುದಾಯಕ್ಕೆ ಸೇರಿದ ಚೆನ್ನಿತ್ತಲಾ ಅವರು ಕೇರಳದ ಗೃಹ ಸಚಿವರಾಗಿಯೂ, ಪ್ರತಿಪಕ್ಷ ನಾಯಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ ಕೇರಳ ಘಟಕದ ಮಾಜಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಪ್ರಸ್ತುತ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿರುವ ಚೆನ್ನಿತ್ತಲಾ ಅವರು ಸಂಘಟನಾ ಚತುರ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಾಲ್ಕು ಬಾರಿ ಸಂಸದರಾಗಿದ್ದ ಅವರ ರಾಜಕೀಯ ಅನುಭವವೂ ಮುಖ್ಯಮಂತ್ರಿ ಸ್ಥಾನಕ್ಕೆ ಬಲ ತುಂಬಿದೆ.

ಭಾನುವಾರಕ್ಕೆ ಅಂತಿಮ ನಿರ್ಧಾರ ಸಾಧ್ಯ

ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಪಕ್ಷವು ಭಾನುವಾರದೊಳಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಎಐಸಿಸಿ ವೀಕ್ಷಕರಿಗೆ ಶಾಸಕರು ಹಾಗೂ ಪಕ್ಷದ ಹಿರಿಯ ನಾಯಕರು ತಮ್ಮ ಅಭಿಪ್ರಾಯವನ್ನು ಸಲ್ಲಿಸಿದ ಬಳಿಕ ಹೈಕಮಾಂಡ್ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ.

“ನಾನು ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಮುಖ್ಯಮಂತ್ರಿ ಯಾರು ಎಂಬುದು ಭಾನುವಾರಕ್ಕೆ ಸ್ಪಷ್ಟವಾಗಲಿದೆ” ಎಂದು ವಟ್ಟಿಯೂರಕಾವು ಕ್ಷೇತ್ರದಿಂದ ಗೆದ್ದ ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಮರಳಿದೆ. ಕಾಂಗ್ರೆಸ್ ಪಕ್ಷ 63 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಕಾಂಗ್ರೆಸ್ ಹೊರತಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಕೇರಳ ಕಾಂಗ್ರೆಸ್ (ಜಾಕಬ್), ರೆವಲ್ಯೂಷನರಿ ಮಾರ್ಕ್ಸಿಸ್ಟ್ ಪಾರ್ಟಿ ಆಫ್ ಇಂಡಿಯಾ (ಆರ್‌ಎಂಪಿಐ), ಜನಾಧಿಪತ್ಯ ಸಂರಕ್ಷಣ ಸಮಿತಿ (ಜೆಎಸ್‌ಎಸ್) ಸೇರಿದಂತೆ ಹಲವು ಪಕ್ಷಗಳು ಮೈತ್ರಿಕೂಟದಲ್ಲಿವೆ. ಅವುಗಳಲ್ಲಿ ಐಯುಎಂಎಲ್ 22 ಸ್ಥಾನಗಳನ್ನು ಗೆದ್ದಿದ್ದು, ಕೇರಳ ಕಾಂಗ್ರೆಸ್ (ಜಾಕಬ್) ಮತ್ತು ಆರ್‌ಎಂಪಿಐ ತಲಾ ಒಂದು ಸ್ಥಾನ ಗಳಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!