ತಿರುವನಂತಪುರ: ಕೇರಳದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಮೇ 18ರಂದು ನಡೆಯಲಿದ್ದು, ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ವಿ.ಡಿ. ಸತೀಶನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿನ್ನೆ ಸಂಜೆ ನಡೆದ ಕಾಂಗ್ರೆಸ್ ವಿಧಾನಸಭಾ ಪಕ್ಷದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಮೇ 21ರಂದು ವಿಧಾನಸಭೆ ಸಮಾವೇಶಗೊಳ್ಳಲಿದ್ದು, ಆ ಸಂದರ್ಭದಲ್ಲಿ ನೂತನ ಶಾಸಕರು ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.ಇದರ ಜೊತೆಗೆ ಕಾಂಗ್ರೆಸ್ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಷ್ಟ್ರೀಯ ನಾಯಕರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ವಿಜಯ್ ಅವರಿಗೆ ಸಹ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಅಗತ್ಯ ಬೆಂಬಲ ಪತ್ರ ಸಲ್ಲಿಸಿದರು. ಬಳಿಕ ರಾಜ್ಯಪಾಲರು ಸತೀಶನ್ ಅವರನ್ನು ಸರ್ಕಾರ ರಚಿಸಲು ಅಧಿಕೃತವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಹಾಗೂ ಕೇರಳದ ಉಸ್ತುವಾರಿ ಹೊಂದಿರುವ ಎಐಸಿಸಿ ಕಾರ್ಯದರ್ಶಿ ದೀಪಾ ದಾಸ್ ಮುನ್ನಿ ಉಪಸ್ಥಿತರಿದ್ದರು.