ಭಾರೀ ಮಳೆ, ಭೂಕುಸಿತ, ರೆಡ್ ಅಲರ್ಟ್; ವಯನಾಡಿನ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ

ಅತಿಭಾರೀ ಮಳೆಯ ಹಿನ್ನೆಲೆಯಲ್ಲಿ ವಯನಾಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜುಲೈ 8, ಬುಧವಾರ) ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ವಯನಾಡು ಜಿಲ್ಲಾಧಿಕಾರಿ ಮೇಘಾ ಶ್ರೀ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಕಳ್ಳಾಡಿ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಇನ್ನೂ ಎರಡು ಎನ್‌ಡಿಆರ್‌ಎಫ್ (NDRF) ತಂಡಗಳು ಆಗಮಿಸಲಿವೆ. ರಾತ್ರಿ ತಡವರೆಗೂ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಮೇಘಾ ಶ್ರೀ ತಿಳಿಸಿದ್ದಾರೆ.

“ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಇಡೀ ಪ್ರದೇಶವನ್ನು ಪರಿಶೀಲಿಸಲಾಗುವುದು. ಇದುವರೆಗೆ ಮೂರು ಮೃತದೇಹಗಳನ್ನು ಹೊರತೆಗೆದಿದ್ದೇವೆ. ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಗಂಭೀರವಾಗಿಲ್ಲ” ಎಂದು ಅವರು ತಿಳಿಸಿದ್ದಾರೆ.

ವಯನಾಡಿನಲ್ಲಿ ಕಳೆದ ರಾತ್ರಿ ಇಂದೇ ಭಾರೀ ಮಳೆ ಸುರಿಯುತ್ತಿದೆ. ಇಂದು ಬೆಳಿಗ್ಗೆ ಕಳ್ಳಾಡಿಯ ಮೀನಾಕ್ಷಿ ಸೇತುವೆ ಸಮೀಪ ಭೂಕುಸಿತ ಸಂಭವಿಸಿದ್ದು, ಆರಂಭದಲ್ಲಿ ಮೂರು ಸಾವುಗಳು ವರದಿಯಾಗಿದ್ದವು. ವಯನಾಡು ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲೇ ಈ ಅಪಘಾತ ಸಂಭವಿಸಿದೆ. ಸೇತುವೆ ಸಮೀಪದ ಗುಡ್ಡ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಇದೇ ವೇಳೆ, ಮೀನಾಕ್ಷಿ ಸೇತುವೆ ಸಮೀಪ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಬಹುದೆಂದು ವರದಿಯಾಗಿದೆ. ಪ್ರಸ್ತುತ ಐದು ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಮೃತರೆಲ್ಲರೂ ವಲಸೆ ಕಾರ್ಮಿಕರಾಗಿದ್ದಾರೆ.

ಸುರಂಗ ಮಾರ್ಗ ನಿರ್ಮಾಣಕ್ಕಾಗಿ ರಾಶಿಯಾಗಿ ಹಾಕಿದ್ದ ಮಣ್ಣು ಕುಸಿದು ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮಣ್ಣಿನಡಿ ಎಷ್ಟು ಮಂದಿ ಸಿಲುಕಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಗಾಯಗೊಂಡ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!