ಮಂಜೇಶ್ವರ: ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ತಾಳದ ನೆಲ್ಲಿಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಪ್ರವಾಸಿಗೆ ದಾರುಣ ಅಂತ್ಯ.ನೆಲ್ಲಿಕಟ್ಟೆ ನಿವಾಸಿ ಶಂಸುದ್ದೀನ್ ಪೈಕ (68) ಸಾವನ್ನಪ್ಪಿದ ದುರ್ದೈವಿ. ಅವರ ಪುತ್ರ ಸಲ್ಮಾನ್ ಫಾರಿಸ್ (22) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಬೆಳಿಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಶಂಸುದ್ದೀನ್ ಅವರು ತಮ್ಮ ಮಗನೊಂದಿಗೆ ಕಾರಿನಲ್ಲಿ ಕಾಸರಗೋಡು ರೈಲ್ವೆ ನಿಲ್ದಾಣಕ್ಕೆ ತೆರಳುತ್ತಿರುವ ಮಧ್ಯೆ ಕಾಸರಗೋಡು ಡಿಪೋದಿಂದ ಪುತ್ತೂರಿನ ಕಡೆಗೆ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗನನ್ನು ತಕ್ಷಣವೇ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶಂಸುದ್ದೀನ್ ಅವರು ಕೊನೆಯುಸಿರೆಳೆದಿದ್ದಾರೆ.
ಮೂಲತಃ ಪೈಕ ನಿವಾಸಿಯಾದ ಶಂಸುದ್ದೀನ್ ಅವರು ದೀರ್ಘಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಕೆಲವು ವರ್ಷಗಳ ಹಿಂದಷ್ಟೇ ಅವರು ನೆಲ್ಲಿಕಟ್ಟೆಯಲ್ಲಿ ಕಾಯಂ ಆಗಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.