ಮಂಜೇಶ್ವರ: ಹಿಂದೂ ಸಂಗಮ ಆಯೋಜನ ಸಮಿತಿ ಮಂಜೇಶ್ವರ ಪಂಚಾಯತ್ ವತಿಯಿಂದ ಮಂಜೇಶ್ವರ ಹಿಂದೂ ಸಂಗಮ ಕಾರ್ಯಕ್ರಮವು ಮಾರ್ಚ್ 8ರಂದು ಎಸ್.ಎ.ಟಿ ಶಾಲಾ ಮೈದಾನದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಸಂಜೆ 3 ಗಂಟೆಗೆ ಶ್ರೀಮತ್ ಅನಂತೇಶ್ವರ ದೇವಾಲಯದ ವಠಾರದಿಂದ ಭವ್ಯ ಶೋಭಾಯಾತ್ರೆ ಆರಂಭವಾಗಲಿದೆ. ಶೋಭಾಯಾತ್ರೆಯಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ತಂಡಗಳು ಭಾಗವಹಿಸಲಿದ್ದು, ಮಂಜೇಶ್ವರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಎಸ್.ಎ.ಟಿ ಶಾಲಾ ಮೈದಾನಕ್ಕೆ ಆಗಮಿಸಲಿದೆ. ಶೋಭಾಯಾತ್ರೆಯ ನಂತರ ಆದರ್ಶ ವ್ಯಕ್ತಿಗಳ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಸಾಮೂಹಿಕವಾಗಿ ವಂದೇ ಮಾತರಂ ಗಾಯನವನ್ನು ಆಯೋಜಿಸಲಾಗಿದೆ.
ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಧಾರ್ಮಿಕ ಮುಖಂಡರು, ಗಣ್ಯರು ಹಾಗೂ ಸಮಾಜದ ಪ್ರಮುಖರು ಭಾಗವಹಿಸಿ ಸಂದೇಶ ನೀಡಲಿದ್ದಾರೆ. ಹಿಂದೂ ಸಮಾಜದಲ್ಲಿ ಏಕತೆ, ಸಂಸ್ಕೃತಿ ಮತ್ತು ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಂಜೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ವ್ಯಕ್ತಪಡಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಹಿಂದೂ ಸಂಗಮ ಆಯೋಜನ ಸಮಿತಿಯ ಸದಸ್ಯರು ಹಾಗೂ ಸ್ವಯಂಸೇವಕರು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.