ಕಾಸರಗೋಡು: ಚುನಾವಣಾ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾಸರಗೋಡು ಮಂಡಲ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರಿಗೆ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ಕಾಸರಗೋಡು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.
ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಬೂತ್ ಮಟ್ಟದಿಂದಲೇ ಪಕ್ಷದ ಸಂಘಟನೆಯನ್ನು ಬಲಪಡಿಸಿ ಜನಸಂಪರ್ಕವನ್ನು ಹೆಚ್ಚಿಸುವುದು ಅಗತ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಕಾಸರಗೋಡು ಮಂಡಲಾಧ್ಯಕ್ಷ ಗುರುಪ್ರಸಾದ್ ಪ್ರಭು ವಹಿಸಿದ್ದರು.
ಕಾರ್ಯಾಗಾರದಲ್ಲಿ ಸುಧಾಮ ಗೋಸಾಡ, ಎಂ.ಎಲ್. ಅಶ್ವಿನಿ, ಜಯಪ್ರಕಾಶ್, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ ಕುದ್ರೆಪಾಡಿ, ಮಂಡಲ ಕಾರ್ಯದರ್ಶಿಗಳಾದ ಚಂದ್ರಶೇಖರ ಹಾಗೂ ಶ್ರೀಧರ ಕೂಡ್ಲು ಸೇರಿದಂತೆ ಹಲವರು ಮಾತನಾಡಿ, ಚುನಾವಣೆಯನ್ನು ಎದುರಿಸಲು ಸಂಘಟನಾ ಬಲವರ್ಧನೆ, ಕಾರ್ಯತಂತ್ರ ರೂಪಣೆ ಮತ್ತು ಕಾರ್ಯಕರ್ತರ ಸಕ್ರಿಯ ಪಾತ್ರದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.