ಕಾಸರಗೋಡು: ಮಲಯಾಳಂ ಭಾಷಾ ಮಸೂದೆ–2025ರಲ್ಲಿ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ದುಂಡುಮೇಜಿನ ಪರಿಷತ್ತು ನಡೆಯಲಿದೆ. ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆಗೆ ಸಂಬಂಧಿಸಿದಂತೆ ಕನ್ನಡಿಗರ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಕಾಸರಗೋಡು ಭಾಗದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಒಗ್ಗೂಡಿ ಮನವಿಯನ್ನು ಸಿದ್ಧಪಡಿಸಿ, ಸಹಿ ಸಂಗ್ರಹ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ. ಮುಂದಿನ ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಆಯ್ಕೆಯಾಗುವ ಸರ್ಕಾರವು ಈ ಮಸೂದೆಯನ್ನು ಮರುಪರಿಶೀಲಿಸಿ ಸೂಕ್ತ ತಿದ್ದುಪಡಿಯೊಂದಿಗೆ ಜಾರಿಗೆ ತರಬೇಕೆಂದು ಸಭೆಯಲ್ಲಿ ಆಗ್ರಹ ವ್ಯಕ್ತವಾಗಲಿದೆ.
ಅಪರಾಹ್ನ 3 ಗಂಟೆಗೆ ನಡೆಯಲಿರುವ ಈ ವಿದ್ವತ್ ಗೋಷ್ಠಿಯಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಸ್ತಾವನೆ ಸಲ್ಲಿಸಲಿದ್ದು, ದಿವ್ಯಾ ಗಟ್ಟಿ ಪರಕ್ಕಿಲ ಸಮನ್ವಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೆ. ಮರಳೀಧರ ಬಳ್ಳಕ್ಕುರಾಯ, ಎ.ಆರ್. ಸುಬ್ಬಯಕಟ್ಟೆ, ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾಧ್ಯಮ ಕ್ಷೇತ್ರದ ಅನೇಕ ಪ್ರಮುಖರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಶಂಕರ ಕೆ. ಸ್ವಾಗತಿಸಲಿದ್ದು, ಕಾವ್ಯ ಕುಶಲ ಧನ್ಯವಾದ ಸಲ್ಲಿಸಲಿದ್ದಾರೆ. ಕೆ. ಜಗದೀಶ ಕೂಡ್ಲು ಕಾರ್ಯಕ್ರಮವನ್ನು ನಿರೂಪಿಸಲಿದ್ದಾರೆ.