ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳು ತ್ಯಾಜ್ಯದ ಕೂಪಗಳಾಗಿ ಮಾರ್ಪಟ್ಟಿದ್ದು, ಇಡೀ ಪರಿಸರ ದುರ್ವಾಸನೆಯಿಂದ ನರಳುತ್ತಿದೆ. ಮಳೆಗಾಲ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆಗೆ ಯಾವುದೇ ಶಾಶ್ವತ ಪರಿಹಾರ ಕಾಣದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಮುಖ ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿಗಳು ಗುಡ್ಡದಂತೆ ಜಮಾಯಿಸಿದ್ದು, ಪ್ಲಾಸ್ಟಿಕ್ ಚೀಲಗಳು, ಕೊಳೆತ ಆಹಾರ ಪದಾರ್ಥಗಳು ಮತ್ತು ಮೃತ ಪ್ರಾಣಿಗಳ ಅವಶೇಷಗಳಿಂದ ಪರಿಸರ ಅಸ್ವಚ್ಛವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಿದ್ದು, ಶಾಲಾ ಮಕ್ಕಳು ಮತ್ತು ಪಾದಚಾರಿಗಳು ಮೂಗು ಮುಚ್ಚಿಕೊಂಡೇ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.
ಪರಿಸರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ ಜನಪ್ರತಿನಿಧಿಗಳು, ಚುನಾವಣೆ ಸಮೀಪಿಸುತ್ತಿದ್ದಂತೆ ಮಾತ್ರ ಸಕ್ರಿಯರಾಗುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಭಿವೃದ್ಧಿಯ ಹೆಸರಿನಲ್ಲಿ ಭರವಸೆ ನೀಡುವವರು ವಾಸ್ತವ ಸಮಸ್ಯೆಗಳನ್ನು ಕಡೆಗಣಿಸಿದ್ದಾರೆ” ಎಂಬ ಆರೋಪ ಕೇಳಿಬಂದಿದೆ.
ಮಂಜೇಶ್ವರದ ಜನತೆ ಈ ಬಾರಿ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಪರಿಹಾರ ಒದಗಿಸದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದು ಅಥವಾ ‘ನೋಟಾ’ ಆಯ್ಕೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.