ಕಾಸರಗೋಡು:
ಗಡಿನಾಡು ಕಾಸರಗೋಡಿನ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಭವನ ಸಮೂಹ ಸಂಸ್ಥೆಗಳ ಮುಖ್ಯಸ್ಥೆ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ 2026ನೇ ಸಾಲಿನ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲು ನಿರ್ಧರಿಸಲಾಗಿದೆ.
ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶಿರೂರು ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ ಮತ್ತು ಕಥಾಬಿಂದು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಏಪ್ರಿಲ್ 12ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ ‘ಕಥಾಬಿಂದು ಸಾಹಿತ್ಯ ಸಮ್ಮೇಳನ 2026’ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸಮ್ಮೇಳನವನ್ನು ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು, ಮಾಜಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀಪತಿ ಭಟ್, ಪ್ರದೀಪ್ ಕುಮಾರ್ ಕಲ್ಕೂರ, ಭುವನಾಭಿರಾಮ ಉಡುಪ, ಜಯಾನಂದ ಪೆರಾಜೆ, ಡಾ. ಕೊಲಚಪ್ಪೆ ಗೋವಿಂದ ಭಟ್ ಹಾಗೂ ಡಾ. ವಾಮನ್ ರಾವ್ ಬೇಕಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಕಾಸರಗೋಡು ಕನ್ನಡ ಭವನ ಹಾಗೂ ಅದರ ವಿವಿಧ ಸಂಸ್ಥೆಗಳ ಮೂಲಕ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಪಾರ ಸೇವೆ ಸಲ್ಲಿಸುತ್ತಿರುವ ಸಂಧ್ಯಾರಾಣಿ ಟೀಚರ್ ಅವರ ಸಾಧನೆಯನ್ನು ಗುರುತಿಸಿ ಈ ಗೌರವ ಪ್ರಶಸ್ತಿ ನೀಡಲಾಗುತ್ತಿದೆ.
ಸಂಧ್ಯಾರಾಣಿ ಟೀಚರ್ ಅವರಿಗೆ ಈ ಗೌರವ ದೊರೆತ ಹಿನ್ನೆಲೆಯಲ್ಲಿ ಕನ್ನಡ ಭವನದ ಗೌರವಾಧ್ಯಕ್ಷ ಪ್ರದೀಪ್ ಬೇಕಲ್, ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ಕಾರ್ಯದರ್ಶಿ ವಸಂತ್ ಕೆರೆಮನೆ, ರಾಜೇಶ್ ಕೋಟೆಕಣಿ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದ್ದಾರೆ.