ಮಂಗಳೂರು: ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಶನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 7 ರಿಂದ 9 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಜನ ಜಾಥ ನಡೆಯಲಿದೆ ಎಂದು ಡಿ ವೈ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಹೇಳಿದರು.
ಅವರು ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉದ್ಯೋಗ ಸೃಷ್ಟಿಯಾಗಬೇಕಾದರೆ ಮತ್ತು ಸ್ಥಳೀಯರಿಗೆ ಅದರ ಲಾಭ ಸಿಗಬೇಕಾದರೆ, ನಿರುದ್ಯೋಗ ನಿವಾರಣೆ ಆಗಬೇಕಾದರೆ ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸುವ ಜೊತೆ ಜೊತೆಗೆ ತಾಲೂಕುಗಳಲ್ಲಿ ಕೈಗಾರಿಕ ವಲಯಗಳನ್ನು ಸ್ಥಾಪಿಸುವ, ಖಾಯಂ ನೌಕರರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ನಡೆಸಬೇಕು . ಇದರ ಜೊತೆಗೆ ವಿವಿಧ ಸರಕಾರಿ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳ ಭರ್ತಿ, ಗುತ್ತಿಗೆ ಉದ್ಯೋಗಗಳನ್ನು ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.
ಈ ಜಾಥವು ಸೆಪ್ಟೆಂಬರ್ 7ರಂದು ಬೆಳ್ತಂಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆ ವೇಳೆ ಮುಖ್ಯ ಅತಿಥಿಯಾಗಿ ಖ್ಯಾತ ರಂಗಕರ್ಮಿ ಸತೀಶ್ ಶೆಟ್ಟಿ ಹಿರಿಯಡ್ಕ, ಡಿವೈಎಫ್ಐ ರಾಜ್ಯ ಅಧ್ಯಕ್ಷರಾದ ಲವಿತ್ರ ವಸ್ತದ್ ಭಾವಹಿಸಲಿದ್ದಾರೆ. ಸೆಪ್ಟೆಂಬರ್ 9ರಂದು ಸಮಾರೋಪದ ವೇಳೆ ಪ್ರಮುಖ ಭಾಷಣಗಾರರಾಗಿ ಎಂ. ವಿಜಿನ್ ಶಾಸಕರು, ಡಿವೈಎಫ್ಐ ಕೇಂದ್ರ ಸಮಿತಿ ಸದಸ್ಯರು, ಮುಖ್ಯ ಅತಿಥಿಗಳಾಗಿ ಡಿವೈಎಫ್ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಪ್ರೊ. ಫಣಿರಾಜ್ ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯ ಮುನ್ನ ಡಾ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಯುವಜನರ ಬೃಹತ್ ಮೆರವಣೆಗೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಸರಕಾರವು ಭದ್ರತೆಯ ಉದ್ಯೋಗದ ಸೃಷ್ಟಿಯನ್ನು ಮಾಡಿಲ್ಲ, ಗುತ್ತಿಗೆ ಆಧಾರದ ಮೇಲೆ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ವ್ಯಾಪಾರಿ ಸಂಸ್ಥೆಗಳು, ದೊಡ್ಡ ಆಸ್ಪತ್ರೆಗಳು, ಬಂದರು, ವಿಮಾನ ನಿಲ್ದಾಣ ಸಹಿತ ಸಾರ್ವಜನಿಕ ವಲಯ ದೊಡ್ಡ ಕೈಗಾರಿಕೆಗಳಿವೆ , ಈ ಎಲ್ಲಾ ಸೌಕರ್ಯಗಳು ಇದ್ದರೂ ಸ್ಥಳೀಯ ಯುವಜನರಿಗೆ ಉತ್ತಮ ಉದ್ಯೋಗ ಅವಕಾಶ ಸೃಷ್ಟಿಸುವಲ್ಲಿ ಸರಕಾರ ಸೋತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು, ಜಿಲ್ಲಾ ಪದಾಧಿಕಾರಿಗಳಾದ ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ ಮುಂತಾದವರು ಉಪಸ್ಥಿತರಿದ್ದರು.